ನಮಸ್ಕಾರ... ಬನ್ನಿ.. ಏನೋ ಆ ಕ್ಷಣದಲ್ಲಿ ತೋಚಿದ್ದು ಗೀಚಿ ಒಂದಷ್ಟು ಗುಡ್ಡೆ ಹಾಕಿದ್ದೇನೆ. ಒಳಗೆ ಬಂದುಬಿಟ್ಟಿದ್ದೀರಿ, ಇನ್ನೇನೂ ಮಾಡುವುದು ಮತ್ತೆ, ಬನ್ನಿ ಭಾವಗೊಂಚಲಲ್ಲಿ ನೇತಾಡೋಣ....!

Friday 31 August 2012

ಅಭಿಪ್ರಾಯ ಮತ್ತು ಇತರೆ ಕಥೆಗಳು….

ಅಭಿಪ್ರಾಯ…

ಶಿಷ್ಯ: ಗುರುಗಳೇ ಈಗ ದೇಶದಲ್ಲಿ ಎಲ್ಲೆಲ್ಲೂ ಧರ್ಮ-ಧರ್ಮಗಳ ನಡುವೆ ಬರೀ ಗಲಭೆ, ದೊಂದಿ ನಡೆಯುತ್ತಿದೆ. ಈ ವಿಚಾರವಾಗಿ ತಮ್ಮ ಅಭಿಪ್ರಾಯವೇನು
ಗುರುಗಳು: ಧರ್ಮ ಧರ್ಮದ ನಡುವೆ ಎಂದೂ ಜಗಳ ನಡೆದಿಲ್ಲ. ಅದು ಅಧರ್ಮ ಅಧರ್ಮದ ನಡುವಿನ ಕಲಹ. ನಿನ್ನಭಿಪ್ರಾಯವನ್ನು ಮೊದಲು ಬದಲಿಸಿಕೋ..
---
ತಳ ನೀತಿ...

ಹಸಿವನ್ನು ತಾಳದ ಆಕೆ ನೆಲದ ಮೇಲೆ ಬಿದ್ದು ಹೊರಳಾಡುತ್ತಿದ್ದಳು. ಆಕೆಯನ್ನು ನೋಡಿದ್ದೇ ಗುರುಗಳು ಶಿಷ್ಯನ ಕಿವಿಯಲ್ಲಿ ಏನೋ ಪಿಸುಗುಟ್ಟಿದರು.
ಓಡಿಹೋದ ಶಿಷ್ಯ ತುಂಡು ಬಟ್ಟೆ ತಂದು ಆಕೆಯ ಮುಖ ಮುಚ್ಚಿದ...
---
ಅಕ್ಕಿ - ಅನ್ನ...

ಪಟ್ಟಣದ ಹೋಟೆಲ್ ಒಂದರಲ್ಲಿ ಹೊಟ್ಟೆ ತುಂಬಾ ತಿಂದ ರೈತನೋರ್ವ ಹೆಚ್ಚು ಹಣ ತೆತ್ತು ಬರುವಾಗ ಹೀಗೆ ಅಂದುಕೊಂಡ
"ಅಕ್ಕಿಯನ್ನು ಮಾರುವ ಬದಲು, ನಾನು ಅನ್ನವನ್ನೇ ಮಾರಬಹುದಾಗಿತ್ತಲ್ಲವೇ?"
---
ಗಾಳಿ…

‘ಈ’ ಜಾತಿಯವರಿಗೆ ದೇವಸ್ಥಾನ ಮತ್ತು ಹೋಟೆಲ್ ಒಳಗೆ ಪ್ರವೇಶವಿಲ್ಲ ಎಂದು ತೀರ್ಪಿತ್ತ ಊರ ಯಜಮಾನ ಸಮಾಧಾನಗೊಂಡು ಸಾವಧಾನದಿಂದ ಉಸಿರೆಳೆದುಕೊಂಡ
ಅವನು ಎಳೆದುಕೊಂಡ ಗಾಳಿ ಆ ‘ಈ’ ಜಾತಿಯವರ ಬೆನ್ನು ತಾಕಿ ಬಂದಿತ್ತು.
ಇಲ್ಲಿಗೆ ಬರುವಷ್ಟರಲ್ಲಿ ಅವರೂ ಎಳೆದು ಬಿಟ್ಟಿದ್ದ ಗಾಳಿ ಕೂಡಿಕೊಂಡಿದ್ದು ಆತನಿಗೆ ಗೊತ್ತೇ ಆಗಲಿಲ್ಲ….!
---
ಧರ್ಮ...

ಕೆಲವರನ್ನು ಭಯತ್ಪಾದಕರೆಂಬ ಶಂಕೆ ವ್ಯಕ್ತವಾಗಿ ಬಂಧಿಸಲಾಯಿತು…
ಒಬ್ಬ: ಅವರು ‘ಆ’ ಧರ್ಮದವರು…
ಮತ್ತೊಬ್ಬ: ತಪ್ಪು, ಅವರು ‘ಆ’ ಧರ್ಮವನ್ನು ಅರ್ಥ ಮಾಡಿಕೊಳ್ಳದವರು…!
---
ಬೇಡಿದವರು...

ಮೊನ್ನೆ ವಿಜಯ ಮಲ್ಯ ಎಂಬಾತ ದೇವಸ್ಥಾನ ಒಂದಕ್ಕೆ ಚಿನ್ನದ ಬಾಗಿಲು ಕೊಡಲು ಹೋದಾಗ ದೇವಸ್ಥಾನದ ಆವರಣ ಸ್ವಚ್ಛವಾಗಿತ್ತಂತೆ.
ಕಾರಣವೇನೆಂದರೆ 'ಇಷ್ಟು ದಿನ ಬೇಡುತ್ತಿದ್ದ ಭಿಕ್ಷುಕರನ್ನು ಹೊಡೆದು ಓಡಿಸಿದ್ದರು'
ಬೇಡದವನ ಬಳಿ ಹೋಗುವಾಗ ಬೇಡಿದವರೇ ಬೇಡವಾದರು...

ಅದೇ ಮಲ್ಯ ದೇವಸ್ಥಾನಕ್ಕೆ ಬರುವುದು ಒಂದು ಘಂಟೆ ತಡವಾಯಿತಂತೆ. ನಡೆದು ಬರುವ ವಿಜಯಮಲ್ಯನ ಕಾಲನ್ನು ಕಿಂಗ್ ಫಿಷರ್ ಕುಡಿದ ನಮ್ಮ ಸಿದ್ಧ ಹಿಡಿದುಕೊಂಡಿದ್ದ. ಸಿದ್ಧನ ಜುಟ್ಟಿನ ಜೊತೆಗೆ ಆಕೆಯ ಹೆಂಡತಿಯ ತಾಳಿಯನ್ನೂ ಹಿಡಿದುಕೊಂಡಿದ್ದ ಸಾಲ ಕೊಟ್ಟ ಊರ ಗೌಡ...
---
ಹಾಲು - ತುಪ್ಪ...

ಎಳೆ ಕಂದನನ್ನು ತಬ್ಬಿಕೊಂಡು ಭಿಕ್ಷೆ ಬೇಡುತ್ತಿದ್ದ ಅಮ್ಮ ಅಂದಳು "ಮಗುವೇ, ಭಿಕ್ಷೆ ಬೇಡಿಯಾದರೂ ನಿನಗೆ ಹಾಲು ತುಪ್ಪ ತಿನ್ನಿಸಿ ಸಾಕುವೆ"
ಆಕೆ ಬೇಡಿದ್ದು ದೇವರಿಗೆ ಕೇಳಿಸಲೇ ಇಲ್ಲ.
ಆತ ಕ್ಷೀರಾಭಿಷೇಕ, ತುಪ್ಪಾಭಿಷೇಕದಲ್ಲಿ ಮಗ್ನ.
ಮಗುವಿಗೆ ಬೇಕಾಗಿದ್ದ ಅದೇ ಹಾಲು, ತುಪ್ಪ ಆಲ್ಲಿ ಹರಿಯುತ್ತಿತ್ತು ದೇವಸ್ಥಾನದ ಮೂಲೆಗಿಂಡಿಗೆ
---
ಜಗಜ್ಜಾಹೀರು…

ಜಗಳದ ಮಧ್ಯೆ ಆಕೆ "ನೀನು ಗಂಡಸೇ ಅಲ್ಲ" ಎಂದು ಗಂಡನನ್ನು ಒಂದಷ್ಟು ಜನಗಳಿಗೆ ಕೇಳುವಂತೆ ಜೋರಾಗಿ ಬೈದಳು. ಮುನಿಸಿಕೊಂಡ ಆಕೆ ಬೇಸರ ಕಳೆಯಲು ಟೀವಿ ಹಚ್ಚಿದಳು..
“ಗಂಡನಿಗೇ ‘ಅದು’ ಇಲ್ಲ” ಎಂಬ ವಾರ್ತೆ… ಇವಳಿಗಿಂತ ಹೆಚ್ಚು ನಾಚಿಕೆಗೆಟ್ಟ ಮಾಧ್ಯಮಗಳು…
---
ಅಕ್ಕ ತಂಗಿ – ಅಣ್ಣ ತಮ್ಮ…

ಮೈ ಕೈ ಕಾಣುವಂತೆ ತುಂಡು ಬಟ್ಟೆ ಧರಿಸಿ ಬಂದಿದ್ದ ಆಕೆಯನ್ನು ಆತ ದುರುಗುಟ್ಟಿಕೊಂಡು ನೋಡುತ್ತಿದ್ದ…
ಆಕೆ: ನಿನಗೆ ಅಕ್ಕ ತಂಗಿಯರಿಲ್ಲವೇ?
ಆತ: ನಿನಗೆ ಅಣ್ಣ ತಮ್ಮಂದಿರಿಲ್ಲವೇ??!
---
ಸರಿ – ತಪ್ಪು..

ಕೈಯಿಂದ ಜಾರಿದ ಆ ಫೋಟೋ ಕೆಳಕ್ಕೆ ಬೀಳುತ್ತಿತ್ತು. ಕಾಲಿನಿಂದಲಾದರೂ ತಡೆಯಬಹುದಾಗಿತ್ತು.
ಸರಿಯೋ ತಪ್ಪೋ ಎಂದು ಯೋಚಿಸುವಷ್ಟರಲ್ಲಿ ಅದು ನೆಲಕ್ಕಪ್ಪಳಿಸಿ ಹೊಡೆದೇ ಹೋಯಿತು..

2 comments:

  1. "ಅಭಿಪ್ರಾಯ" is too good! where did you get it from? did you write it on your own? these stories have the strong odor of zen stories...

    regs,
    -R

    ReplyDelete
  2. ಪ್ರತಿಯೊಂದು ನ್ಯಾನೋ ಕಥೆಯೂ ಗೆಲ್ಲುತ್ತದೆ ಮೋಹನಣ್ಣ.. ಮನದಲ್ಲಿ ಮೂಡುವ ಒಡೆದ ಭಾವಗಳನ್ನು ಒಟ್ಟುಗೂಡಿಸಿ ಚೌಕಟ್ಟು ನೀಡಿ ಅಚ್ಚುಕಟ್ಟಾಗಿ ಅರವಿದ್ದೀರಿ.. ಚೆನ್ನಾಗಿವೆ, ನನಗೂ ’ಧರ್ಮ...’ ಬಹಳವಾಗಿ ಕಾಡಿತು..

    ReplyDelete